ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು 2026-27ನೇ ಶೈಕ್ಷಣಿಕ ವರ್ಷದಲ್ಲೂ ಸೇವೆಯಲ್ಲಿ ಮುಂದುವರಿಸಿ ಸೇವಾ ಭದ್ರತೆ ನೀಡಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ದಾಖಲಾತಿ ಹೆಚ್ಚಿಸುವುದರಿಂದ ಹಿಡಿದು ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಪ್ರಸ್ತುತ ಅತಿಥಿ ಉಪನ್ಯಾಸಕರಿಗೆ ಕೇವಲ ರೂ.14,000 ಗೌರವಧನ ನೀಡಲಾಗುತ್ತಿದ್ದು, ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರನ್ನು ಸೇವಾ ಹಿರಿತನದ ಆಧಾರದ ಮೇಲೆ ಮುಂದುವರಿಸುವ ಬದಲು ಮೆರಿಟ್ ಆಧಾರದ ಮೇಲೆ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಸಂಘಟನೆ ಆರೋಪಿಸಿತು. ಇದರಿಂದ ಪ್ರತಿವರ್ಷವೂ ಅನೇಕ ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.
ಪದವಿಪೂರ್ವ ಇಲಾಖೆಯ ನಿಯಮದಂತೆ ವಾರಕ್ಕೆ 10 ರಿಂದ 12 ಗಂಟೆಗಳ ಕಾರ್ಯಭಾರ ಮಾತ್ರ ನೀಡಬೇಕಿದ್ದರೂ, ವಾಸ್ತವದಲ್ಲಿ 20 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ನೀಡಲಾಗುತ್ತಿದೆ ಎಂದು ಉಪನ್ಯಾಸಕರು ದೂರಿದರು. ಜೊತೆಗೆ ಪಿಎಫ್ ಸೇರಿದಂತೆ ಯಾವುದೇ ಸಾಮಾಜಿಕ ಭದ್ರತಾ ಸೌಲಭ್ಯಗಳು ಇಲ್ಲದಿರುವುದರಿಂದ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಕಳೆದ ಎರಡು ತಿಂಗಳಿನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಇಬ್ಬರು ಅತಿಥಿ ಉಪನ್ಯಾಸಕರು ಅಕಾಲಿಕ ಮರಣ ಹೊಂದಿದ್ದರೂ, ಅವರ ಕುಟುಂಬಗಳಿಗೆ ಸರ್ಕಾರ ಅಥವಾ ಇಲಾಖೆಯಿಂದ ಯಾವುದೇ ನೆರವು ದೊರಕಿಲ್ಲ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.
10 ರಿಂದ 15 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರನ್ನು ಕಾಯಂ ಉಪನ್ಯಾಸಕರಾಗಿ ನೇಮಕ ಮಾಡಬೇಕು. ಕಳೆದ ಆರು ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲವಾಗಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಮುಖ ಬೇಡಿಕೆಗಳು
- ಸೇವಾ ಹಿರಿತನದ ಆಧಾರದ ಮೇಲೆ ಎಲ್ಲಾ ಅತಿಥಿ ಉಪನ್ಯಾಸಕರನ್ನು 2026-27ನೇ ಶೈಕ್ಷಣಿಕ ವರ್ಷದಲ್ಲೂ ಮುಂದುವರಿಸಬೇಕು.
- ಮಾಸಿಕ ಗೌರವಧನವನ್ನು ರೂ.14,000ರಿಂದ ರೂ.30,000ಕ್ಕೆ ಹೆಚ್ಚಿಸಬೇಕು.
- ಮುಂಬರುವ ಸರ್ಕಾರಿ ನೇಮಕಾತಿಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡಿ ಸೇವೆ ಕಾಯಂಗೊಳಿಸಬೇಕು.
- ಸೇವಾ ಪ್ರಮಾಣ ಪತ್ರ, ಗುರುತಿನ ಚೀಟಿ ಹಾಗೂ ಕೃಪಾಂಕ ನೀಡುವ ಮೂಲಕ ಸೇವಾ ಭದ್ರತೆ ಒದಗಿಸಬೇಕು.
- ನಿಯಮಾನುಸಾರ ವಾರಕ್ಕೆ 10 ರಿಂದ 12 ಗಂಟೆಗಳ ಕಾರ್ಯಭಾರ ಮಾತ್ರ ನೀಡಬೇಕು.
ಪ್ರತಿಭಟನೆಯಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎ. ಮುರುಗಪ್ಪ, ರಾಜ್ಯ ಕಾರ್ಯದರ್ಶಿ ರಾಜೇಶ್ ಭಟ್, ಜಂಟಿ ಕಾರ್ಯದರ್ಶಿ ನಾಗರತ್ನ ಎಸ್.ಜಿ., ಸಲಹೆಗಾರ ವಿ.ಎನ್. ರಾಜಶೇಖರ್, ಶಿಕ್ಷಣ ಉಳಿಸಿ ಸಮಿತಿಯ ಐಶ್ವರ್ಯ ಸಿ.ಎಂ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.




