ಬೆಂಗಳೂರು ಮೇ 27: ರಾಜ್ಯದ ಸಾರ್ವಜನಿಕ ಸ್ವಾಮ್ಯದ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಿಗೆ ಹಸ್ತಾಂತರಿಸಲು ನಡೆಯುತ್ತಿರುವ ಯತ್ನವನ್ನು ತೀವ್ರವಾಗಿ ವಿರೋಧಿಸಿ, ಟಾಟಾ ಪವರ್ ಕಂಪನಿ ಸಲ್ಲಿಸಿರುವ ವಿದ್ಯುತ್ ವಿತರಣಾ ಪರವಾನಗಿ ಅರ್ಜಿಯನ್ನು ತಕ್ಷಣವೇ ತಿರಸ್ಕರಿಸಬೇಕೆಂದು ಕರ್ನಾಟಕ ವಿದ್ಯುತ್ ಮಂಡಳಿ ನೌಕರರ ಸಂಘಗಳ ಒಕ್ಕೂಟ ಆಗ್ರಹಿಸಿದೆ.
ನಗರದ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡರು, ಬೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಜೆಸ್ಕಾಂ ಹಾಗೂ ಮಸ್ಕಾಂ ವ್ಯಾಪ್ತಿಯ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಗಿ ಕೋರಿ ಮುಂಬೈನ ‘ದಿ ಟಾಟಾ ಪವರ್ ಕಂಪನಿ ಲಿಮಿಟೆಡ್’ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿರುವುದನ್ನು ಖಂಡಿಸಿದರು.
ರಾಜ್ಯದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿರುವ ಸಾವಿರಾರು ಕೋಟಿ ಮೌಲ್ಯದ ವಿದ್ಯುತ್ ವಿತರಣಾ ಜಾಲ, ಉಪಕೇಂದ್ರಗಳು ಹಾಗೂ ಮೂಲಸೌಕರ್ಯವನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದು ಜನಹಿತಕ್ಕೆ ವಿರುದ್ಧವಾದ ಕ್ರಮ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.
ಗ್ರಾಮೀಣ ಭಾಗಗಳಿಗೆ ಅನ್ಯಾಯವಾಗುವ ಆತಂಕ
ಖಾಸಗಿ ಕಂಪನಿಗಳ ಮುಖ್ಯ ಉದ್ದೇಶ ಲಾಭ ಗಳಿಸುವುದಾಗಿದ್ದು, ಅವು ಕೈಗಾರಿಕಾ ಹಾಗೂ ವಾಣಿಜ್ಯ ನಗರ ಪ್ರದೇಶಗಳ ಮೇಲಷ್ಟೇ ಗಮನಹರಿಸುತ್ತವೆ. ಇದರಿಂದ ಗ್ರಾಮೀಣ ಭಾಗಗಳ ವಿದ್ಯುತ್ ಸೇವೆ ನಿರ್ಲಕ್ಷ್ಯಕ್ಕೊಳಗಾಗಿ ಸಾರ್ವಜನಿಕ ವಲಯದ ಎಸ್ಕಾಂಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ತಿಳಿಸಿದರು.
ಜನಕಲ್ಯಾಣ ಯೋಜನೆಗಳಿಗೆ ಧಕ್ಕೆ
ರೈತರ ಉಚಿತ ಪಂಪ್ಸೆಟ್ ವಿದ್ಯುತ್, ಗೃಹಜ್ಯೋತಿ, ಭಾಗ್ಯಜ್ಯೋತಿ ಹಾಗೂ ಕುಟೀರಜ್ಯೋತಿ ಸೇರಿದಂತೆ ಜನಸಾಮಾನ್ಯರ ಯೋಜನೆಗಳ ಯಶಸ್ಸಿನ ಹಿಂದೆ ವಿದ್ಯುತ್ ನೌಕರರ ಹಗಲಿರುಳಿನ ಶ್ರಮವಿದೆ. ಖಾಸಗಿ ಸಂಸ್ಥೆಗಳು ಇಂತಹ ಸಾಮಾಜಿಕ ಬದ್ಧತೆಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಾಧ್ಯತೆ ಕಡಿಮೆ ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ.
ದರ ಏರಿಕೆ ಮತ್ತು ಉದ್ಯೋಗ ಭದ್ರತೆ ಕುರಿತು ಆತಂಕ
ಪ್ರಸ್ತುತ ಸರ್ಕಾರಿ ಸ್ವಾಮ್ಯದ ಕಂಪನಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿವೆ. ಆದರೆ ಖಾಸಗೀಕರಣವಾದಲ್ಲಿ ಸ್ಮಾರ್ಟ್ ಮೀಟರ್ ನೆಪದಲ್ಲಿ ವಿದ್ಯುತ್ ದರ ಏರಿಕೆ ಮಾಡಿ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಹೆಚ್ಚುವರಿ ಹೊರೆ ಹಾಕುವ ಸಾಧ್ಯತೆ ಇದೆ ಎಂದು ಆರೋಪಿಸಲಾಯಿತು.
ಇಲಾಖೆಯಲ್ಲಿ ಈಗಾಗಲೇ 35 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ, ಸಿಬ್ಬಂದಿ ಹೆಚ್ಚಿನ ಒತ್ತಡದ ನಡುವೆಯೂ ಸೇವೆ ಸಲ್ಲಿಸುತ್ತಿದ್ದಾರೆ. ಖಾಸಗೀಕರಣದಿಂದ ಹೊಸ ಉದ್ಯೋಗ ಸೃಷ್ಟಿ ಕುಂಠಿತವಾಗುವುದಲ್ಲದೆ, ಗುತ್ತಿಗೆ, ಹೊರಗುತ್ತಿಗೆ ಹಾಗೂ ಕಾಯಂ ನೌಕರರ ಉದ್ಯೋಗ ಭದ್ರತೆಗೂ ಧಕ್ಕೆಯಾಗಲಿದೆ ಎಂದು ತಿಳಿಸಿದರು.
ಉಗ್ರ ಹೋರಾಟದ ಎಚ್ಚರಿಕೆ
ರಾಜ್ಯ ಸರ್ಕಾರದ ಆಡಳಿತ ಸಾಮರ್ಥ್ಯ, ತಾಂತ್ರಿಕ ಪರಿಣಿತಿ ಹಾಗೂ ಬಲವಾದ ಮೂಲಸೌಕರ್ಯ ಇರುವಾಗ ಖಾಸಗಿ ಸಂಸ್ಥೆಗೆ ಕರ್ನಾಟಕದ ವಿದ್ಯುತ್ ಕ್ಷೇತ್ರವನ್ನು ಒಪ್ಪಿಸಲು ಅವಕಾಶ ನೀಡುವುದಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.
ಒಂದು ವೇಳೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಟಾಟಾ ಪವರ್ ಅರ್ಜಿಗೆ ಅನುಮತಿ ನೀಡಲು ಮುಂದಾದರೆ, ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದರ ಜೊತೆಗೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಕೈಗೆತ್ತಿಕೊಳ್ಳುವುದಾಗಿ ಕರ್ನಾಟಕ ವಿದ್ಯುತ್ ಮಂಡಳಿ ನೌಕರರ ಸಂಘಗಳ ಒಕ್ಕೂಟ ಎಚ್ಚರಿಕೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಬಸವಣ್ಣ ಸಿ., ಮಹಾ ಪ್ರಧಾನ ಕಾರ್ಯದರ್ಶಿ ಬಲರಾಮ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.




